ಬೆಳಗಾವಿ, ಪ್ರಸಕ್ತ ಆರ್ಥಿಕ ವರ್ಷದ ಅಂತಿಮ ಘಟ್ಟದಲ್ಲಿ ಇರುವುದರಿಂದ ಪ್ರತಿಯೊಂದು ಇಲಾಖೆಗಳು ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಯಾವುದೇ ಕಾರಣಕ್ಕೂ ಅನುದಾನ ವ್ಯಪಗತ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯೂ ಆಗಿರುವ ಎಲ್.ಕೆ.ಅತೀಕ್ ಹೇಳಿದರು.
ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶನಿವಾರ(ಡಿ.3) ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಸಕ್ತ ಆರ್ಥಿಕ ವರ್ಷದ ಅಂತಿಮ ಘಟ್ಟದಲ್ಲಿರುವುದರಿಂದ ಪ್ರತಿಯೊಂದು ಯೋಜನೆ ಮತ್ತು ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು.
15ನೇ ಹಣಕಾಸು ಯೋಜನಯಡಿ ಅನುದಾನದ ಕಾಮಗಾರಿಗಳನ್ನು ಪರಿಶೀಲಿಸಬೇಕು. ಯಾವುದೇ ಹಂತದಲ್ಲಿ ಅವ್ಯವಹಾರ ಆಗದಂತೆ ತಾಲ್ಲೂಕು ಪಂಚಾಯತ್ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು.
ಅಮೃತ ಗ್ರಾಮ ಪಂಚಾಯತಿಗಳ ಮೊದಲ ಹಂತದ ಕಾಮಗಾರಿಗಳನ್ನು ಡಿಸೆಂಬರ್ ಅಂತ್ಯಕ್ಕೆ ಹಾಗೂ ಎರಡನೇ ಹಂತದ ಕಾಮಗಾರಿಗಳನ್ನು ಮುಂಬರುವ ಮಾರ್ಚ್ ಅಂತ್ಯಕ್ಕೆ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಅಮೃತ್ ಸರೋವರ ಕಾಮಗಾರಿಗಳನ್ನು ಪ್ರಸಕ್ತ ಆರ್ಥಿಕ ವರ್ಷದಲ್ಲಿ ಪೂರ್ಣಗೊಳಿಸಬೇಕು. ಎಲ್ಲ ಗ್ರಾಮ ಪಂಚಾಯತ್ ಗಳಲ್ಲಿ ಮೊದಲು ಗ್ರಂಥಾಲಯ ಸ್ಥಾಪಿಸಬೇಕು. ನಂತರದ ದಿನಗಳಲ್ಲಿ ಇದನ್ನು ಡಿಜಿಟಲ್ ಗ್ರಂಥಾಲಯವಾಗಿ ಪರಿವರ್ತಿಸಬೇಕು.
ಯಾವುದೇ ಇಲಾಖೆಯು ಅನುದಾನ ವ್ಯಪಗತವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ.ಅತೀಕ್ ತಿಳಿಸಿದರು.
ಕೊನೆಗಳಿಗೆಯಲ್ಲಿ ಕಾಮಗಾರಿ ಆರಂಭ, ಖರೀದಿಗೆ ಮುಂದಾಗಿ ಅನಗತ್ಯವಾಗಿ ಸಮಸ್ಯೆಗಳಿಗೆ ಸಿಲುಕಬಾರದು ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.
ಜಿಲ್ಲೆಯ ಆರೋಗ್ಯ ಸೌಲಭ್ಯಗಳು ಮತ್ತು 23 ತಜ್ಞವೈದ್ಯರ ಕೊರತೆಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡ ಅವರು, ಕೂಡಲೇ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ತಜ್ಞವೈದ್ಯರ ಕೊರತೆಯನ್ನು ನೀಗಿಸಲಾಗುವುದು ಎಂದರು.
ಕೇರಳ ರಾಜ್ಯದ ಮಾದರಿಯಲ್ಲಿ ಶಿಶುಮರಣ ಹಾಗೂ 1-5 ವಯಸ್ಸಿನ ಮಕ್ಕಳ ಮರಣ ಪ್ರಮಾಣವನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಪರಿಣಾಮಕಾರಿಯಾದ ಕ್ರಿಯಾಯೋಜನೆಯನ್ನು ರೂಪಿಸುವಂತೆ ತಿಳಿಸಿದರು.
ಸಮಾಜಕಲ್ಯಾಣ, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿರುವ ವಿದ್ಯಾರ್ಥಿಗಳಿಗೆ ಆಪ್ತಸಲಹೆ ನೀಡಲು ಕ್ರಮ ಕೈಗೊಳ್ಳಬೇಕು. ವಿಶೇಷವಾಗಿ ಪರೀಕ್ಷೆ ಸಮಯದಲ್ಲಿ ಹಾಗೂ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ಅಥವಾ ಓರಿಯಂಟೇಷನ್ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಅತೀಕ್ ಸಲಹೆ ನೀಡಿದರು.
ವಸತಿನಿಲಯಗಳಲ್ಲಿ ಊಟೋಪಹಾರದ ಮೆನು ಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕು. ಮೆನು ಚಾರ್ಟ್ ಪ್ರಕಾರವೇ ಊಟೋಪಾಹಾರ ಒದಗಿಸಬೇಕು.
ಗುಣಮಟ್ಟದ ಶಿಕ್ಷಣ ಮತ್ತು ಉತ್ತಮ ಫಲಿತಾಂಶಕ್ಕಾಗಿ ಹೆಚ್ಚಿನ ಪ್ರಯತ್ನ ಮಾಡಬೇಕು.
ಜಿಲ್ಲೆಯಲ್ಲಿರುವ ಅನರ್ಹ ಬಿಪಿಎಲ್ ಕಾರ್ಡುಗಳನ್ನು ರದ್ದುಪಡಿಸುವುದರ ಜತೆಗೆ ಅರ್ಹ ಕುಟುಂಬಗಳನ್ನು ಗುರುತಿಸಿ ಅವರಿಗೆ ಕಾರ್ಡು ವಿತರಿಸಲು ಕ್ರಮ ಕೈಗೊಳ್ಳಲು ತಿಳಿಸಿದರು.
ಆದಾಯ ತೆರಿಗೆ ಪಾವತಿಸುವಂತಹ ವ್ಯಕ್ತಿಗಳ ಬಿಪಿಎಲ್ ಕಾರ್ಡು ರದ್ದುಪಡಿಸಬೇಕು. ಉಳಿದಂತೆ ಇತರೆ ಮಾರ್ಗಸೂಚನೆಗಳನ್ನು ಅನುಸರಿಸಿ ಅನರ್ಹ ಕಾರ್ಡು ರದ್ದುಗೊಳಿಸಬೇಕು ಎಂದರು.
ಶೌಚಾಲಯ ನಿರ್ಮಾಣ-ನಿರ್ವಹಣೆಗೆ ಆದ್ಯತೆ ನೀಡಲು ಸೂಚನೆ:
ಶಾಲೆಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ ಜಿಲ್ಲಾ ಪಂಚಾಯತ ಹಾಗೂ ನರೇಗಾ ಯೋಜನೆಯಡಿ ಎಲ್ಲ ನೆರವು ನೀಡಲಾಗುತ್ತಿದೆ. ಹೊಸದಾಗಿ ನಿರ್ಮಿಸಲಾದ ಶೌಚಾಲಯಗಳ ನಿರ್ವಹಣೆಗೆ ಆಯಾ ಶಾಲಾ ಮಂಡಳಿ ಅಥವಾ ಮುಖ್ಯೋಪಾಧ್ಯಾಯರು ಅಗತ್ಯ ಕ್ರಮ ವಹಿಸಬೇಕು. ಪ್ರತಿಶಾಲೆಯಲ್ಲಿ ಮೂಲಸೌಕರ್ಯ ಇರುವಂತೆ ನೋಡಿಕೊಳ್ಳುವುದು ಮುಖ್ಯೋಪಾಧ್ಯಾಯರ ಕರ್ತವ್ಯವಾಗಿದೆ.
ಮಕ್ಕಳಿಗೆ ಪಠ್ಯಕ್ರಮದ ಜತೆಗೆ ಸ್ವಚ್ಛತೆ, ಶೌಚಾಲಯ ಬಳಕೆ ಹಾಗೂ ಇತರೆ ನಾಗರಿಕ ಜವಾಬ್ದಾರಿಯನ್ನು ತಿಳಿಸಿಕೊಡಬೇಕು.
ಯಾವುದೇ ಕಟ್ಟಡ ನಿರ್ಮಾಣ ದೊಡ್ಡ ವಿಷಯವಲ್ಲ; ಆದರೆ ಅವುಗಳ ನಿರ್ವಹಣೆ ದೊಡ್ಡ ಸವಾಲಾಗಿದೆ ಎಂದು ಎಲ್.ಕೆ.ಅತೀಕ್ ತಿಳಿಸಿದರು.
ಜಿಲ್ಲೆಯ ಎಲ್ಲ ಅಂಗನವಾಡಿ ಕಟ್ಟಡಗಳ ಕಾಮಗಾರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ಅಂಗನವಾಡಿಗೆ ಪೂರೈಕೆಯಾಗಯವ ಆಹಾರಪದಾರ್ಥಗಳು ಮತ್ತು ಧಾನ್ಯಗಳ ಗುಣಮಟ್ಟವನ್ನು ಹಾಗೂ ಮಕ್ಕಳ ಹಾಜರಾತಿಯನ್ನು ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲಿಸಬೇಕು ಎಂದರು.
ಜಾನುವಾರುಗಳ ಚರ್ಮ ಗಂಟುರೋಗ ನಿರ್ವಹಣೆ ಮತ್ತು ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.
ಅಥಣಿ ತಾಲ್ಲೂಕಿನ ಕೊಕಟನೂರಿನಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಪಶುವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಕೆರೆ ನಿರ್ಮಾಣ, ಸಸಿ ನೆಡುವುದು ಸೇರಿದಂತೆ ಮಳೆ ನೀರು ಕೊಯ್ಲು ಯೋಜನೆ ಅನುಷ್ಠಾನಗೊಳಿಸಬೇಕು ಎಂದು ಸಲಹೆ ನೀಡಿದರು.
ಅಧಿವೇಶನದ ಅಗತ್ಯ ಸಿದ್ಧತೆಗೆ ಸೂಚನೆ:
ಅಧಿವೇಶನಕ್ಕೆ ಕೆಲವೇ ದಿನಗಳು ಉಳಿದಿರುವುದರಿಂದ ವಸತಿ, ಊಟೋಪಾಹಾರ, ಸಾರಿಗೆ, ಕಂಪ್ಯೂಟರ್ ಅಳವಡಿಕೆ, ಅಂತರ್ಜಾಲ ಸಂಪರ್ಕ ಸೇರಿದಂತೆ ಅಧಿವೇಶನಕ್ಕೆ ಸಂಬಂಧಿಸಿದಂತೆ ಎಲ್ಲ ಸಿದ್ಧತೆಗಳನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಅತೀಕ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಳಗಾವಿ ನಗರದಲ್ಲಿ ಪ್ರತಿ ಮನೆ ಮನೆಯಿಂದ ಕಸ ಸಂಗ್ರಹಿಸಬೇಕು. ಎಲ್ಲಿ ಆರ್.ಎಫ್.ಐ.ಡಿ. ಅಳವಡಿಸಲಾಗಿದೆಯೋ ಅವುಗಳನ್ನು ಸಮರ್ಪಕವಾಗಿ ಬಳಕೆ ಮಾಡುವ ಬಗ್ಗೆ ಪಾಲಿಕೆಯ ಸಿಬ್ಬಂದಿಗೆ ತಿಳಿವಳಿಕೆ ನೀಡಬೇಕು ಎಂದು ತಿಳಿಸಿದರು.
ನಗರದಲ್ಲಿ 35 ಸಾವಿರ ಎಲ್ಇಡಿ ದೀಪಗಳನ್ನು ಅಳವಡಿಸಲಾಗುತ್ತಿದ್ದು, ಅಲಂಕಾರಿಕ ದೀಪ ಸೇರಿದಂತೆ ಎಲ್ಲ ದೀಪಗಳನ್ನು ಆದಷ್ಟು ಬೇಗನೆ ಅಳವಡಿಸಬೇಕು.
ಒಟ್ಟಾರೆ ನಗರ ಸ್ವಚ್ಛ ಮತ್ತು ಸುಂದರವಾಗಿ ಕಾಣಬೇಕು. ಈ ನಿಟ್ಟಿನಲ್ಲಿ ಎಲ್ಲ ಕೆಲಸಗಳು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ತಿಳಿಸಿದರು.
ಟ್ರೀ ಪಾರ್ಕ್-ದೇವಿವನ ನಿರ್ಮಾಣ:
ಸಭೆಯಲ್ಲಿ ಮಾತನಾಡಿದ ಡಿಸಿಎಫ್ ಹರ್ಷಭಾನು, ಜಿಲ್ಲೆಯ ಕೆಲವೆಡೆ ಟ್ರೀ ಪಾರ್ಕ್ ಹಾಗೂ ದೇವಿವನ ಯೋಜನೆಗಳನ್ನು ಕಾರ್ಯರೂಪಗೊಳಿಸಲಾಗುತ್ತಿದೆ. ಈಗಾಗಲೇ ಮಿನಿ ಟೈಗರ್ ಸಫಾರಿಯನ್ನು ಭೂತರಾಮನಟ್ಟಿಯ ರಾಣಿಚನ್ನಮ್ಮ ಪ್ರಾಣಿ ಸಂಗ್ರಹಾಲಯದಲ್ಲಿ ಆರಂಭಿಸಲಾಗಿದೆ ಎಂದು ಸಭೆಗೆ ತಿಳಿಸಿದರು.
ಕಾಕತಿಯಲ್ಲಿ ಸಿರಿಚಂದನವನ ಸಂರಕ್ಷಣೆಗೆ ಕ್ರಮ ಕೈಗೊಳ್ಳಲಾಗಿದೆ. ಬೆಳಗಾವಿ ನಗರದಲ್ಲಿ ವೈಜ್ಞಾನಿಕವಾಗಿ ಸಸಿ ಬೆಳೆಸುವ ಕುರಿತು ಕೆಲಸವಾಗಬೇಕಿದೆ.
ವಿಟಿಯು ನಗರವನ ಅಭಿವೃದ್ಧಿಪಡಿಸಲಾಗಿದ್ದು, ಸಮರ್ಪಕವಾಗಿ ನಿರ್ವಹಣೆಗೆ ಕ್ರಮ ವಹಿಸಲಾಗಿದೆ ಎಂದು ಹರ್ಷಭಾನು ವಿವರಿಸಿದರು.
ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 99,884 ಮಕ್ಕಳಿಗೆ 34 ಕೋಟಿ ರೂಪಾಯಿ ಶಿಷ್ಯವೇತನವನ್ನು ವಿತರಿಸಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಹೊಸಮನಿ ತಿಳಿಸಿದರು.
ಯಾವುದೇ ವರ್ಗದ ರೈತರ ಮಕ್ಕಳಿಗೆ ಈ ಸೌಲಭ್ಯ ನೀಡಲಾಗುತ್ತಿದ್ದು, ಈಗಾಗಲೇ ಬೇರೆ ಶಿಷ್ಯವೇತನ ಪಡೆಯುತ್ತಿದ್ದರೂ ಇದು ಹೆಚ್ಚುವರಿಯಾಗಿ ನೀಡಲಾಗುತ್ತಿದೆ.
ಒಂದು ಕುಟುಂಬದಲ್ಲಿ ಎಷ್ಟೇ ಮಕ್ಕಳಿದ್ದರೂ ಎಲ್ಲರಿಗೂ ಈ ಸೌಲಭ್ಯ ದೊರಕುತ್ತದೆ ಎಂದರು.
ವಿಮಾನ ನಿಲ್ದಾಣದ 9 ಕಿ.ಮೀ. ಚತುಷ್ಪಥ ರಸ್ತೆಯ 73 ಕೋಟಿ ರೂಪಾಯಿ ವೆಚ್ಚದ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿ ಸೊಬರದ ತಿಳಿಸಿದರು.
ನಗರ ಸ್ವಚ್ಛತೆ-ಸೌಂದರ್ಯೀಕರಣಕ್ಕೆ ಸೂಚನೆ:
ಅಧಿವೇಶನ ನಡೆಯಲಿರುವುದರಿಂದ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೂಡಲೇ ಪೂರ್ಣಗೊಳಿಸಬೇಕು.
ಅನೇಕ ಹೊಸ ಕಟ್ಟಡಗಳಲ್ಲಿ ಪೀಠೋಪಕರಣ ವ್ಯವಸ್ಥೆ ಇಲ್ಲದಿರುವುದರಿಂದ ವರ್ಷಗಟ್ಟಲೆ ಕೆಲ ಕಟ್ಟಡಗಳ ಬಳಕೆಯಾಗುತ್ತಿಲ್ಲ. ಇದನ್ನು ತಪ್ಪಿಸಲು ಯಾವುದೇ ಹೊಸ ಸರಕಾರಿ ಕಟ್ಟಡಗಳನ್ನು ನಿರ್ಮಿಸುವಾಗ ಪೀಠೋಪಕರಣ ವೆಚ್ಚವನ್ನು ಸೇರಿಸಿಯೇ ಅನುದಾನ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
ಮಹಾನಗರ ಪಾಲಿಕೆ, ಸ್ಮಾರ್ಟ್ ಸಿಟಿ, ರೈಲ್ಚೆ ಸೇರಿದಂತೆ ನಗರದಲ್ಲಿ ಯಾವುದೇ ರಸ್ತೆ ಕಾಮಗಾರಿ ಕೈಗೊಂಡಾಗ ಸಂಬಂಧಿಸಿದ ಕಾಮಗಾರಿ ಮತ್ತು ನಿರ್ವಹಣೆ ಕುರಿತು ಮಾಹಿತಿಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಸೂಚನೆ ನೀಡಿದರು.
ಕಳೆದ ಬಾರಿಯಂತೆ ನಗರ ಸೌಂದರ್ಯೀಕರಣ ಕೆಲಸವನ್ನು ಕೈಗೆತ್ತಿಕೊಳ್ಳಬೇಕು ಎಂದು ತಿಳಿಸಿದರು.
ಗಡಿಭಾಗದ ಜನರಿಗೆ ತುರ್ತು ಚಿಕಿತ್ಸೆ ಒದಗಿಸಲು ಅನುಕೂಲವಾಗುವಂತೆ ಗಡಿಭಾಗದಲ್ಲಿ ಒಂದು ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಸ್ಥಾಪಿಸುವ ಅಗತ್ಯವಿದೆ. ಇದಕ್ಕೆ ಸಂಬಂಧಿಸಿದಂತೆ ಪ್ರಸ್ತಾವನೆಯನ್ನು ಸಿದ್ಧಪಡಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಸಮಾಜಕಲ್ಯಾಣ ಇಲಾಖೆಯ ಎಲ್ಲ ವಿದ್ಯಾರ್ಥಿ ವಸತಿನಿಲಯಗಳಲ್ಲಿ ಸಿಸಿಟಿವಿ ಅಳವಡಿಸಲು ಕ್ರಮ ಕೈಗೊಳ್ಳಬೇಕು.
ಶಾಲಾ ವಾಹನಗಳಲ್ಲಿ ಮಿತಿಗಿಂತ ಹೆಚ್ಚು ಮಕ್ಕಳನ್ನು ಕರೆದೊಯ್ಯುತ್ತಿರುವುದರಿಂದ ಅಪಘಾತ ಸಂಭವಿಸುತ್ತಿವೆ. ಈ ಬಗ್ಗೆ ಶಾಲಾಮಟ್ಟದಲ್ಲಿ ಸುರಕ್ಷತಾ ಸಮಿತಿ ರಚಿಸಿಕೊಂಡು ನಿರಂತರವಾಗಿ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಕನಿಷ್ಠ 100 ಹೋಮ್ ಸ್ಟೇ ಆರಂಭಿಸಲು ಲೈಸೆನ್ಸ್ ನೀಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
ಅಂಡರ್ ಗ್ರೌಂಡ್ ಕಸದ ತೊಟ್ಟಿ:
ನಗರದ ಕೆಲವೆಡೆ ಅಂಡರ್ ಗ್ರೌಂಡ್ ಕಸದತೊಟ್ಟಿಗಳನ್ನು ಕೆಲವೆಡೆ ಅಳವಡಿಸಲಾಗಿದ್ದು, ಕಸ ಎತ್ತುವ ಕ್ರೇನ್ ಬಂದ ನಂತರ ಅವುಗಳನ್ನು ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಲಾಗುವುದು ಎಂದು ಮಹಾನಗರ ಪಾಲಿಕೆಯ ಆಯುಕ್ತರಾದ ರುದ್ರೇಶ್ ಘಾಳಿ ತಿಳಿಸಿದರು.
ನಗರದಲ್ಲಿ ಬೀದಿನಾಯಿಗಳ ಸಂಖ್ಯೆ ನಿಯಂತ್ರಣ ಕ್ಕೆ 1500 ಶ್ವಾನಗಳ ಸಂತಾನಶಕ್ತಿಹರಣ ಚಿಕಿತ್ಸೆ ನೀಡಲಾಗಿದೆ.
ನಗರದಲ್ಲಿ ಒಟ್ಟಾರೆ 35 ಸಾವಿರ ಎಲ್ಇಡಿ ಅಳವಡಿಸಲಾಗುತ್ತಿದ್ದು, ಈಗಾಗಲೇ 9 ಸಾವಿರಕ್ಕೂ ಅಧಿಕ ದೀಪಗಳನ್ನು ಈಗಾಗಲೇ ಅಳವಡಿಸಲಾಗಿದೆ ಎಂದು ಮಾಹಿತಿಯನ್ನು ನೀಡಿದರು.
ವಿವೇಕ ಶಾಲಾ ಕೊಠಡಿಗಳು, ಅಂಗನವಾಡಿ ಕಟ್ಟಡಗಳು, ನರೇಗಾ ಹಾಗೂ ಕುಡಿಯುವ ನೀರಿನ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದ ಮಾಹಿತಿಯನ್ನು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ನೀಡಿದರು.
ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಸತಿ ನಿಲಯದ ಪ್ರವೇಶಕ್ಕೆ ಜಿಲ್ಲೆಯಲ್ಲಿ ಅತೀ ಹೆಚ್ಚು ಅರ್ಜಿಗಳ ಬರುತ್ತಿರುವುದರಿಂದ ಇನ್ನಷ್ಟು ವಸತಿನಿಲಯ ಸ್ಥಾಪನೆಯ ಅಗತ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಗಮನಕ್ಕೆ ತಂದರು.
ಸಭೆಯಲ್ಲಿ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಇರುವ ಪೊಲೀಸ್ ಠಾಣೆಗಳಲ್ಲಿ ಮಹಿಳಾ ಶೌಚಾಲಯ ಮತ್ತಿತರ ಸೌಲಭ್ಯಗಳನ್ನು ಒದಗಿಸಬೇಕಿದೆ. ಈ ನಿಟ್ಟಿನಲ್ಲಿ ಯಾವುದಾದರೂ ಯೋಜನೆಯಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಸ್ಮಾರ್ಟ್ ಸಿಟಿ, ಮಹಾನಗರ ಪಾಲಿಕೆ, ಬುಡಾ ಸೇರಿದಂತೆ ಜಿಲ್ಲೆಯ ಎಲ್ಲ ಪ್ರಮುಖ ಇಲಾಖೆಗಳ ಪ್ರಗತಿಯನ್ನು ಪರಿಶೀಲಿಸಲಾಯಿತು.
ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರವೀಣ ಬಾಗೇವಾಡಿ, ಡಿಸಿಪಿ ರವೀಂದ್ರ ಗಡಾದಿ, ಜಿಲ್ಲಾ ನಗರಾಭಿವೃದ್ಧಿ ಯೋಜನಾ ಕೋಶದ ಯೋಜನಾ ನಿರ್ದೇಶಕ ಈಶ್ವರ ಉಳ್ಳಾಗಡ್ಡಿ, ಡಿಎಚ್ಓ ಡಾ.ಮಹೇಶ್ ಕೋಣಿ ಸೇರಿದಂತೆ ಎಲ್ಲ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
**