Uncategorized

ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ ಸ್ವಾಗತ : ಮುರಗೇಶ ನಿರಾಣಿ

Share


ಬಿಜೆಪಿಯಲ್ಲಿ ಬಹಳ ದಿನಗಳಿಂದ ಖಾಲಿಯಿದ್ದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಂದ್ರ ನಾಯಕರು ಬಿ.ವೈ.ವಿಜಯೇಂದ್ರ ಅವರನ್ನು ನೇಮಕ ಮಾಡಿದನ್ನು ಸ್ವಾಗತ ಮಾಡಲಾಗುವುದು. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ತಳಮಟ್ಟದಿಂದ ಪಕ್ಷ ಸಂಘಟಿಸಿ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಕ್ಕೂ ಹೆಚ್ಚು ಸ್ಥಾನ ಗಳಿಸಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಮಂತ್ರಿಗಳನ್ನಾಗಿ ಮಾಡಲಾಗುವುದು ಎಂದು ಮಾಜಿ ಸಚಿವ ಮುರಗೇಶ ನಿರಾಣಿ ಹೇಳಿದರು.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಹುಬ್ಬಳ್ಳಿಯ ನಿವಾಸಕ್ಕೆ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರು ಅಳೆದು ತೂಗಿ ರಾಜ್ಯಾಧ್ಯಕ್ಷರ ನೇಮಕ ಮಾಡಿ ಇವತ್ತಿನ ಸಂದರ್ಭದಲ್ಲಿ ಉತ್ತಮವಾಗಿ ಕೆಲಸ ಮಾಡಲು ಜವಾಬ್ದಾರಿ ಮಾಡಿಕೊಟ್ಟಿದ್ದಾರೆ. ಈ ದಿಸೆಯಲ್ಲಿ ನಾವು ಸಹ ರಾಜ್ಯಾಧ್ಯಕ್ಷರ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡತ್ತೇವೆ ಎಂದರು‌.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಆಕಾಂಕ್ಷಿ ಎಂಬ ಪತ್ರಕರ್ತರ ಪ್ರಶ್ನೆಗೆ ನಾನು ಬಾಗಲಕೋಟೆ ಜಿಲ್ಲೆಯ ಲೋಕಸಭೆ ಕ್ಷೇತ್ರದ ಆಕಾಂಕ್ಷಿ ಅಲ್ಲ. ಹೆಚ್ಚಾಗಿ ನಾನು ರಾಜ್ಯದ ರಾಜಕಾರಣದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದೇನೆ. ಆದರೆ ಲೋಕಸಭೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.

ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರಾಗಿ ನೇಮಕಕ್ಕೆ ಸಂಬಂಧಿಸಿದಂತೆ ಅಸಮಾಧಾನ ವ್ಯಕ್ತವಾದ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿ, ಬಿಜೆಪಿ ಬೃಹತ್ ಪಕ್ಷ, ಸ್ವಾಭಾವಿಕವಾಗಿ ಅಸಮಾಧಾನ ವ್ಯಕ್ತವಾಗುತ್ತದೆ. ಈ ದಿಸೆಯಲ್ಲಿ ನಮ್ಮ ರಾಷ್ಟ್ರೀಯ ನಾಯಕರು ಅಸಮಾಧಾನಗೊಂಡವನ್ನು ಕರೆಸಿ ಮಾತನಾಡಿ ಅಸಮಾಧಾನ ಹೊಗಲಾಡಿಸುತ್ತಾರೆ. ಇದರ ಜೊತೆಗೆ ಯಾವುದೇ ಹಿರಿಯರನ್ನು ಕಡೆಗಣಿಸುವ ಪ್ರಶ್ನೆ ಪಕ್ಷದಲ್ಲಿಲ್ಲ ಎಂದರು.

ಸಿ.ಟಿ.ರವಿ ಅಸಮಾಧಾನ ಕುರಿತು ಮಾತನಾಡಿ, ಅವರು ಒಬ್ಬ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಆಗಿದ್ದರು ಸಹಜವಾಗಿ ಅವರು ಅಸಮಾಧಾನ ಹೊರ ಹಾಕಿದ್ದಾರೆ. ಮುಂದಿನ ದಿನಗಳಲ್ಲಿ ಅವರೇ ಪ್ರಮುಖ ಸ್ಥಾನದಲ್ಲಿ ನಿಂತು ಪಕ್ಷ ಸಂಘಟನೆ ಮಾಡಲಿದ್ದಾರೆ ಎಂದರು.

ಸಿದ್ದರಾಮಯ್ಯ ಬಿಟ್ಟಿ ಭಾಗ್ಯ ಕೊಟ್ಟು ಅಧಿಕಾರ ಪಡೆದಿದ್ದಾರೆ ಆದರೆ ನಾವು ಉತ್ತಮ ಆಡಳಿತ ಇಟ್ಟುಕೊಂಡು ಆಡಳಿತ ನಡೆಸತ್ತೇವೆ. ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಸರ್ಕಾರ ನಾಲ್ಕು ವ್ಯಕ್ತಿಗಳ ಅಲೈಯನ್ಸ್ ಪಕ್ಷವಾಗಿದೆ. ಇದರ ಮುಂದಾಳತ್ವ ಸಿದ್ದರಾಮಯ್ಯ ವಹಿಸಿದ್ದಾರೆ ಎಂದು ಲೇವಡಿ ಮಾಡಿದರು.

ಇದೀಗ ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿ ಬಂದ್ ಮಾಡಿದ್ದಾರೆ.
ಭ್ರಷ್ಟಾಚಾರ ನಡೆಯುತ್ತಿದೆ ಎಂದು ಮುರುಗೇಶ ನಿರಾಣಿ ಕಿಡಿಕಾರಿದರು.

Tags: